ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದ ಗಂಭೀರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಶಂಕೆಯಿಂದ ಆರಂಭವಾದ ಗೃಹ ಕಲಹವೇ ಕೊನೆಗೆ ಹತ್ಯೆಗೆ ಕಾರಣವಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಉತ್ತರ ಕನ್ನಡ ಮೂಲದ ಮಹೇಶ್ ನಾಯ್ಕ್ ಅವರು ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಅವರ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಿದ್ದಾಪುರದಲ್ಲಿ ನೆಲೆಸಿದ್ದರು. ಈ ನಡುವೆ ಮಹಿಳೆ ಜ್ಯೋತಿಷಿ ಕಮಲಾಕರ್ ಭಟ್ ಅವರ ಸಂಪರ್ಕಕ್ಕೆ ಬಂದಿದ್ದು, ಸ್ನೇಹ ಕ್ರಮೇಣ ಆಪ್ತತೆಯಾಗಿ ಮಾರ್ಪಟ್ಟಿತ್ತು ಎನ್ನಲಾಗಿದೆ. ಜ್ಯೋತಿಷಿ ಆಗಾಗ ಮನೆಗೆ ಭೇಟಿ ನೀಡುತ್ತಿದ್ದನು, ಕೆಲವೊಮ್ಮೆ ಅಲ್ಲೇ ತಂಗುತ್ತಿದ್ದನೆಂಬ ಆರೋಪವೂ ಕೇಳಿಬಂದಿದೆ.
ಈ ವಿಷಯವನ್ನು ಗಮನಿಸಿದ ಹಿರಿಯ ಮಗಳು ತಾಯಿಯ ವರ್ತನೆಯ ಬಗ್ಗೆ ಪ್ರಶ್ನಿಸಿ, ಸಂಬಂಧಿಕರಿಗೆ ತಿಳಿಸಿದ್ದಳು. ಇದರಿಂದ ಉದ್ವಿಗ್ನಗೊಂಡ ಮಹಿಳೆ ಮಕ್ಕಳ ಮೇಲೆಯೇ ಹಿಂಸಾತ್ಮಕವಾಗಿ ವರ್ತಿಸಿದ್ದಾಳೆ ಎಂಬ ಆರೋಪವೂ ಇದೆ. ನಂತರ ನಡೆದ ಬೆಳವಣಿಗೆಗಳ ಬಗ್ಗೆ ಹಿರಿಯ ಮಗಳು ತಂದೆ ಮಹೇಶ್ ನಾಯ್ಕ್ ಅವರಿಗೆ ಮಾಹಿತಿ ನೀಡಿದ್ದಾಳೆ.
ಮಗಳ ಮಾತು ಕೇಳಿ ಮಹೇಶ್ ನಾಯ್ಕ್ ತಕ್ಷಣ ಸಿದ್ದಾಪುರಕ್ಕೆ ತೆರಳಿ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಬಳಿಕ ಅವರು ತಮ್ಮ ಸಹೋದರ ವಸಂತ್ ನಾಯ್ಕ್ ಮನೆಗೆ ತೆರಳಿದ್ದರು.
ದೂರು ನೀಡಲಾಗಿದೆ ಎಂಬುದು ತಿಳಿದ ನಂತರ, ಮಹಿಳೆ ಹಾಗೂ ಆಕೆಯ ತಂದೆ ಲೋಕನಾಥ್ ಸೇರಿದಂತೆ ಕೆಲವರು ವಸಂತ್ ಮನೆಗೆ ತೆರಳಿ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಮನಬಂದಂತೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಸಂತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.