Ticker

6/recent/ticker-posts
Responsive Advertisement

Uttarakannda: ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ; ಜನಸ್ನೇಹಿ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ಇನ್ನಿಲ್ಲ

ಮುಂಡಗೋಡ: ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಸ್ನೇಹಿ ಹಾಗೂ ಕರ್ತವ್ಯನಿಷ್ಠ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು (33) ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಅತಿ ಕಿರಿಯ ವಯಸ್ಸಿನಲ್ಲಿ ಸಂಭವಿಸಿದ ಅವರ ಅಕಾಲಿಕ ನಿಧನವು ಪೊಲೀಸ್ ಇಲಾಖೆ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿಯೂ ಆಳವಾದ ದುಃಖವನ್ನುಂಟುಮಾಡಿದೆ.

ಮೂಲಗಳ ಪ್ರಕಾರ, ಯಲ್ಲಾಲಿಂಗ್ ಕುನ್ನೂರು ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ಆರೋಗ್ಯದಲ್ಲಿ ನಿರೀಕ್ಷಿತ ಸುಧಾರಣೆ ಕಾಣಿಸದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ದಕ್ಷ ಹಾಗೂ ಶಿಸ್ತುಬದ್ಧ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಯಲ್ಲಾಲಿಂಗ್ ಕುನ್ನೂರು ಅವರು, ಪ್ರಸ್ತುತ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಎರಡನೇ ಬಾರಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮೊದಲು ಯಲ್ಲಾಪುರ ಹಾಗೂ ಬನವಾಸಿ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಪ್ರಾಮಾಣಿಕತೆ, ಕಾರ್ಯಕ್ಷಮತೆ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವದಿಂದ “ಜನಸ್ನೇಹಿ ಅಧಿಕಾರಿ” ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಮೃತರು ಪತ್ನಿ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದ ಮತ್ತು ಭವಿಷ್ಯದಲ್ಲಿ ಉನ್ನತ ಹುದ್ದೆಗಳಿಗೆ ಏರಬೇಕಿದ್ದ ಯುವ ಅಧಿಕಾರಿಯ ನಿಧನವು ಕುಟುಂಬವನ್ನು ಆಘಾತಕ್ಕೆ ಒಳಪಡಿಸಿದೆ.

ಅವರ ನಿಧನಕ್ಕೆ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದು, ಯಲ್ಲಾಲಿಂಗ್ ಕುನ್ನೂರು ಅವರ ಅಗಲಿಕೆ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು